ಕ್ರಾನಿಕಲ್ಸ್ ೧ ೧೯:೧-೧೯ |
೧. ಇದಾದನಂತರ ಅಮ್ಮೋನಿಯರ ಅರಸ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗ ಅರಸನಾದನು. |
೨. ದಾವೀದನು, “ನಾಹಾಷನು ನನಗೆ ಸ್ನೇಹ ತೋರಿಸಿದ್ದರಿಂದ ನಾನೂ ಅವನ ಮಗ ಹಾನೂನನಿಗೆ ಸ್ನೇಹ ತೋರಿಸುವೆನು,” ಎಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕಾಗಿ ತನ್ನ ದೂತರನ್ನು ಕಳುಹಿಸಿದನು. ಅವರು ಹಾನೂನನನ್ನು ಸಂತೈಸುವುದಕ್ಕಾಗಿ ಅಮ್ಮೋನಿಯರ ದೇಶಕ್ಕೆ ಬಂದರು. |
೩. ಅಲ್ಲಿನ ನಾಯಕರು ಹಾನೂನನಿಗೆ, “ದಾವೀದನು ನಿಮ್ಮ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದಾನೆ. ಇದರಿಂದ ಅವನು ನಿಮ್ಮ ತಂದೆಯನ್ನು ಸನ್ಮಾನಿಸುತ್ತಾನೆ ಎಂದು ತಿಳಿಯುತ್ತೀರೋ? ಇಲ್ಲ, ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನ ಮಾಡಿಕೊಳ್ಳಬೇಕೆಂದು ಬಂದಿದ್ದಾರೆ,” ಎಂದು ದೂರಿತ್ತರು. |
೪. ಆದುದರಿಂದ ಹಾನೂನನು ದಾವೀದನ ಸೈನಿಕರನ್ನು ಬಂಧಿಸಿದನು. ಗಡ್ಡದ ಅರ್ಧಭಾಗವನ್ನು ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು. |
೫. ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದರು. ಬಹಳವಾಗಿ ಅಪಮಾನಹೊಂದಿದ ಅವರಿಗೆ ಆಗ ದಾವೀದನು ಆಳುಗಳ ಮುಖಾಂತರ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಜೆರಿಕೋವಿನಲ್ಲಿದ್ದು ಅನಂತರ ಬನ್ನಿ,” ಎಂದು ಹೇಳಿಸಿದನು. |
೬. ತಾವು ದಾವೀದನಿಗೆ ವೈರಿಗಳಾದೆವು ಎಂದು ಹಾನೂನನಿಗೂ ಅಮ್ಮೋನಿಯರಿಗೂ ತಿಳಿಯಿತು. ಆದುದರಿಂದ ಅವರು ಎರಡು ನದಿಗಳ ಮಧ್ಯದಲ್ಲಿರುವ ಸಿರಿಯಾ ಸೀಮೆಯಿಂದಲೂ ಸಿರಿಯಾದ ಮಾಕದಿಂದಲೂ ಚೊಬಾ ರಾಜ್ಯದಿಂದಲೂ ರಥಗಳನ್ನೂ ರಾಹುತರನ್ನೂ ತರಿಸುವುದಕ್ಕಾಗಿ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು. |
೭. ಆಗ ಮೂವತ್ತೆರಡು ಸಾವಿರ ಮಂದಿ ರಥಬಲದವರೂ ಮಾಕದ ಅರಸನೂ ಅವನ ದಂಡಾಳುಗಳೂ ಅವರ ಸಹಾಯಕ್ಕಾಗಿ ಮೆದಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು. |
೮. ಈ ಸುದ್ದಿ ದಾವೀದನಿಗೆ ಮುಟ್ಟಿತು. ಅವನು ಯೋವಾಬನನ್ನೂ ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು. |
೯. ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು. |
೧೦. ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಯೇಲರಲ್ಲಿ ಶ್ರೇಷ್ಠರಾದ ಎಲ್ಲಾ ಸೈನಿಕರನ್ನು ಆರಿಸಿಕೊಂಡು ಅವರನ್ನು ಸಿರಿಯಾದವರಿಗೆ ಇದಿರಾಗಿ ನಿಲ್ಲಿಸಿದನು. |
೧೧. ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು, |
೧೨. “ಸಿರಿಯಾದವರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುತ್ತೇನೆ. |
೧೩. ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು. |
೧೪. ಯೋವಾಬನೂ ಅವನ ಜನರೂ ಸಿರಿಯಾದವರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಸಿರಿಯಾದವರು ಓಡಿಹೋದರು. |
೧೫. ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮ ಅಬೀಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಜೆರುಸಲೇಮಿಗೆ ಹೋದನು. |
೧೬. ಸಿರಿಯಾದವರಿಗೆ ತಮ್ಮ ಸೈನ್ಯ ಇಸ್ರಯೇಲರಿಂದ ಪರಾಭವಗೊಂಡಿತೆಂದು ಗೊತ್ತಾಯಿತು. ಎಂದೇ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಸಿರಿಯಾದವರನ್ನು ಕರೇ ಕಳುಹಿಸಿದರು. ಹದರೆಜೆರನ ಸೇನಾಪತಿಯಾದ ಶೋಫಕನು ಅವರ ನಾಯಕನಾದನು. |
೧೭. ಈ ಸುದ್ದಿ ದಾವೀದನಿಗೆ ಮುಟ್ಟಿದಾಗ ಅವನು ಇಸ್ರಯೇಲರೆಲ್ಲರನ್ನೂ ಕೂಡಿಸಿಕೊಂಡು ಜೋರ್ಡನ್ ನದಿಯನ್ನು ದಾಟಿ, ಸಿರಿಯಾದವರ ಸಮೀಪಕ್ಕೆ ಬಂದು, ಅವರೊಡನೆ ಕಾಳಗ ನಡೆಸಲು ವ್ಯೂಹಕಟ್ಟಿದನು. |
೧೮. ಸಿರಿಯಾದವರು ಯುದ್ಧಕ್ಕೆ ನಿಂತಾಗ ಇಸ್ರಯೇಲರ ಮುಂದೆ ಸೋತು ಓಡಿಹೋದರು;ದಾವೀದನು ಸಿರಿಯಾದವರ ಏಳುಸಾವಿರ ರಥಗಳನ್ನು ಹಾಳುಮಾಡಿದನು. ನಲವತ್ತು ಸಾವಿರ ಮಂದಿ ಕಾಲಾಳುಗಳನ್ನು ಸದೆಬಡಿದನು. ಸೇನಾಪತಿಯಾದ ಶೋಫಕನನ್ನೂ ಕೊಂದುಬಿಟ್ಟನು. |
೧೯. ಹದರೆಜೆರನಿಗೆ ದಾಸರಾಗಿ ಇದ್ದವರು ಇಸ್ರಯೇಲರ ಮುಂದೆ ತಮ್ಮ ಕೈಸಾಗದೆಂದು ತಿಳಿದು, ದಾವೀದನೊಡನೆ ಸಂಧಾನ ಮಾಡಿಕೊಂಡು ಅವನಿಗೆ ಅಧೀನರಾದರು.ಅಂದಿನಿಂದ ಸಿರಿಯಾದವರು ಅಮ್ಮೋನಿಯರಿಗೆ ಸಹಾಯಮಾಡಲು ಸಮ್ಮತಿಸಲಿಲ್ಲ. |
ಕ್ರಾನಿಕಲ್ಸ್ ೧ ೨೦:೧-೮ |
೧. ಮರುವರ್ಷ, ಅರಸರು ಯುದ್ಧಕ್ಕೆ ಹೊರಡುವ ಕಾಲದಲ್ಲಿ ಯೋವಾಬನು ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದನು. ಅವನೊಡನೆ ಬಲವಾದ ಸೈನ್ಯವಿತ್ತು. ದಾವೀದನು ಜೆರುಸಲೇಮಿನಲ್ಲೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದನ್ನು ಹಾಳುಮಾಡಿಬಿಟ್ಟನು. |
೨. ದಾವೀದನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು; ಅದು ಸುಮಾರು ಮೂವತ್ತೈದು ಕಿಲೋಗ್ರಾಂ ತೂಕದ್ದು. ಅದರಲ್ಲಿ ಇದ್ದ ರತ್ನವನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಆ ಪಟ್ಟಣದಿಂದ ಅವನು ದೊಡ್ಡ ಕೊಳ್ಳೆಯನ್ನೇ ಕೊಂಡು ಹೊಯ್ದನು. |
೩. ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಕೆಲಸ ಮಾಡುವುದಕ್ಕೆ ಹಚ್ಚಿದನು. ಅಮ್ಮೋನಿಯರ ಉಳಿದೆಲ್ಲ ಪಟ್ಟಣದವರೆಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಜೆರುಸಲೇಮಿಗೆ ಮರಳಿದನು. |
೪. ಬಳಿಕ ಫಿಲಿಷ್ಟಿಯರ ವಿರುದ್ಧ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಂದನು. ಫಿಲಿಷ್ಟಿಯರು ಇದರಿಂದ ಕುಗ್ಗಿಹೋದರು. |
೫. ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮ ಲಹ್ಮೀಯನನ್ನು ಕೊಂದನು. ಈ ಲಹ್ಮೀಯನ ಬರ್ಜಿಯ ಹಿಡಿಕೆ ನೇಕಾರರ ಕುಂಟೆಯಷ್ಟು ದೊಡ್ಡದಾಗಿತ್ತು. |
೬. ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರದ ಪುರುಷ ಇದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳು ಇದ್ದವು. ಅವನೂ ರೆಫಾಯನು. |
೭. ಅವನು ಇಸ್ರಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು. |
೮. ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕನಿಂದಲೂ ಹತರಾದರು. |
ಕೀರ್ತನೆಗಳು ೭೮:೨೬-೩೩ |
೨೬. ಆಕಾಶದಲೆಬ್ಬಿಸಿದನು ಮೂಡಣ ಗಾಳಿಯನು I ಒಲುಮೆಯಿಂದ ಹೊರಡಿಸಿದನು ತೆಂಕಣ ಗಾಳಿಯನು II |
೨೭. ಧೂಳಿನಷ್ಟು ಸುರಿಸಿದನು ಮಾಂಸವೃಷ್ಟಿಯನು I ಸಮುದ್ರದ ಮರಳಿನಷ್ಟು ರೆಕ್ಕೆ ಹಕ್ಕಿಗಳನು II |
೨೮. ಬೀಳ್ವಂತೆ ಮಾಡಿದನು ಪಾಳೆಯದ ಮಧ್ಯದಲೂ I ಉದುರಿದವು ಅವರಿದ್ದ ಗುಡಾರಗಳ ಸುತ್ತಲೂ II |
೨೯. ಸಿಕ್ಕಿತು ಅವರಿಗೆ ತಾವು ಬಯಸಿದ್ದು I ತೃಪ್ತರಾದರು ಹೊಟ್ಟೆತುಂಬ ತಿಂದು II |
೩೦. ಆದರೆ ಆ ಜನಕೆ ಆಶೆ ಕೈಗೂಡುವುದಕೆ ಮುನ್ನ I ಬಾಯಿಗೆ ಬಂದ ತುತ್ತು ಹೊಟ್ಟೆಗಿಳಿಯುವುದಕ್ಕೆ ಮುನ್ನ II |
೩೧. ದೈವಕೋಪವೆದ್ದಿತು ಅವರಿಗೆ ವಿರುದ್ಧ I ಮಾಡಿತವರಲಿ ಕೊಬ್ಬಿದವರ ವಧ I ನೆಲಕುರುಳಿತು ಇಸ್ರಯೇಲ ಸಿರಿಜನ II |
೩೨. ಇಷ್ಟಾದರೂ ಪಾಪಮಾಡುತ ಬಂದವರು ಪದೇ ಪದೇ I ದೇವರ ಅದ್ಭುತಕಾರ್ಯಗಳನು ತೊರೆದರು ನಂಬದೆ II |
೩೩. ಆರಿಸಿದನು ಊದಿ ಅವರ ಬಾಳ ಹಣತೆಯನು I ಬರಮಾಡಿದನು ಅವರಿಗೆ ಭೀಕರ ಮರಣವನು II |
ಜ್ಞಾನೋಕ್ತಿಗಳು ೧೯:೨೭-೨೯ |
೨೭. ಮಗನೇ, ಉಪದೇಶ ಕೇಳುವುದನ್ನು ನಿಲ್ಲಿಸಬೇಡ; ನಿಲ್ಲಿಸಿದೆಯಾದರೆ ಬುದ್ಧಿಮಾತಿನಿಂದ ವಂಚಿತನಾಗುವೆ. |
೨೮. ನೀಚಸಾಕ್ಷಿ ನ್ಯಾಯತೀರ್ಪನ್ನು ಮರ್ಯಾದಿಸನು; ದುಷ್ಟಸಾಕ್ಷಿ ದ್ರೋಹವನ್ನೂ ನುಂಗಿಬಿಡುವನು. |
೨೯. ಕುಚೋದ್ಯನಿಗೆ ಕಾದಿದೆ ನ್ಯಾಯತೀರ್ಪು; ದಡ್ಡನ ಬೆನ್ನಿಗೆ ಬೀಳಲಿದೆ ದೊಣ್ಣೆಪೆಟ್ಟು. |
ಪ್ರೇಷಿತರ ೮:೨೬-೪೦ |
೨೬. ಅನಂತರ ದೇವದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣಾಭಿಮುಖವಾಗಿ ಹೋಗು. ಅದು ಜೆರುಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದನು. |
೨೭. ಅಂತೆಯೇ ಫಿಲಿಪ್ಪನು ಹೊರಟನು. ಆಗ ಇಥಿಯೋಪಿಯದ ಕಂಚುಕಿಯೊಬ್ಬನು ಅದೇ ಮಾರ್ಗವಾಗಿ ಬರುತ್ತಿದ್ದನು. ಅವನು ಆ ದೇಶದ ರಾಣಿ ಕಂದಾಕಿಯ ಕೋಶಾಧಿಕಾರಿ ಹಾಗೂ ಸಚಿವ. ದೇವಾರಾಧನೆಗೆಂದು ಜೆರುಸಲೇಮಿಗೆ ಹೋಗಿ ಹಿಂದಿರುಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತು ಯೆಶಾಯನ ಪ್ರವಾದನೆಯನ್ನು ಓದುತ್ತಿದ್ದನು. |
೨೮. *** |
೨೯. ಪವಿತ್ರಾತ್ಮರು ಫಿಲಿಪ್ಪನಿಗೆ, “ನೀನು ಮುಂದೆ ಹೋಗಿ ಆ ರಥದ ಜೊತೆಯಲ್ಲೇ ನಡೆ,” ಎಂದು ತಿಳಿಸಿದರು. |
೩೦. ಫಿಲಿಪ್ಪನು ಮುಂದಕ್ಕೆ ಧಾವಿಸಿ, ಅವನು ಯೆಶಾಯನ ಪ್ರವಾದನೆಯನ್ನು ಓದುತ್ತಿರುವುದನ್ನು ಕೇಳಿಸಿಕೊಂಡನು. “ನೀವು ಓದುತ್ತಿರುವುದು ಅರ್ಥವಾಗುತ್ತಿದೆಯೇ?” ಎಂದು ಪ್ರಶ್ನಿಸಿದನು. |
೩೧. ಆ ಅಧಿಕಾರಿ ಪ್ರತ್ಯುತ್ತರವಾಗಿ, “ಯಾರಾದರೂ ವಿವರಿಸಿದ ಹೊರತು ಇದು ನನಗೆ ಅರ್ಥವಾಗುವುದಾದರೂ ಹೇಗೆ?” ಎಂದನು. ರಥವನ್ನು ಹತ್ತಿ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಹ್ವಾನಿಸಿದನು. |
೩೨. ಅವನು ಓದುತ್ತಿದ್ದ ಪ್ರವಾದನೆ ಇದು: “ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ ಆತನು ಬಾಯ್ದೆರೆಯಲಿಲ್ಲ. |
೩೩. ಆತನನ್ನು ಅವಮಾನಪಡಿಸಲಾಯಿತು ನ್ಯಾಯವನ್ನೇ ಆತನಿಗೆ ನಿರಾಕರಿಸಲಾಯಿತು ಆತನ ಸಂತತಿಯ ಮಾತೇ ಎತ್ತದಂತಾಯಿತು. ಇದಕಾರಣ ಆತನ ಭೌತಿಕಜೀವವನ್ನೇ ಮೊಟಕುಗೊಳಿಸಲಾಯಿತು.” |
೩೪. ಆ ಅಧಿಕಾರಿ ಫಿಲಿಪ್ಪನಿಗೆ, “ಇಲ್ಲಿ ಪ್ರವಾದಿ ಯಾರನ್ನು ಕುರಿತು ಈ ಮಾತುಗಳನ್ನು ಹೇಳಿದ್ದಾನೆ ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ, ಹೇಳಬಲ್ಲೆಯಾ?’ ಎಂದು ಕೇಳಿದನು. |
೩೫. ಆಗ ಫಿಲಿಪ್ಪನು ಮರುತ್ತರವಾಗಿ, ಆ ಪ್ರವಾದನೆಯನ್ನೇ ಆಧಾರವಾಗಿ ತೆಗೆದುಕೊಂಡು, ಯೇಸುವಿನ ಶುಭಸಂದೇಶವನ್ನು ಅವನಿಗೆ ಬೋಧಿಸಿದನು. |
೩೬. ಅವರು ಪ್ರಯಾಣ ಮಾಡುತ್ತಾ ದಾರಿಯಲ್ಲಿ ನೀರಿದ್ದ ಒಂದು ಸ್ಥಳಕ್ಕೆ ಬಂದರು. ಅದನ್ನು ಕಂಡ ಆ ಅಧಿಕಾರಿ, “ಇಲ್ಲಿ ನೀರಿದೆ. ನಾನು ದೀಕ್ಷಾಸ್ನಾನವನ್ನು ಪಡೆಯಲು ಏನಾದರೂ ಅಭ್ಯಂತರವಿದೆಯೇ?” ಎಂದನು. |
೩೭. (ಫಿಲಿಪ್ಪನು, “ನೀವು ಹೃದಯಪೂರ್ವಕವಾಗಿ ವಿಶ್ವಾಸಿಸುವುದಾದರೆ ದೀಕ್ಷಾಸ್ನಾನವನ್ನು ಪಡೆಯಬಹುದು,” ಎಂದನು. “ಯೇಸುಕ್ರಿಸ್ತ ದೇವರ ಪುತ್ರ ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಅಧಿಕಾರಿ ಪ್ರತ್ಯುತ್ತರವಿತ್ತನು). |
೩೮. ಅಧಿಕಾರಿಯ ಆಜ್ಞೆಯಂತೆ ರಥವನ್ನು ಅಲ್ಲಿಯೇ ನಿಲ್ಲಿಸಲಾಯಿತು. ಅವರಿಬ್ಬರೂ ನೀರಿಗೆ ಇಳಿದರು. ಫಿಲಿಪ್ಪನು ಅಧಿಕಾರಿಗೆ ದೀಕ್ಷಾಸ್ನಾನವನ್ನು ಕೊಟ್ಟನು. |
೩೯. ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು. |
೪೦. ಫಿಲಿಪ್ಪನಾದರೋ ಆಜೋತ್ ಎಂಬಲ್ಲಿ ಕಾಣಿಸಿಕೊಂಡನು. ಅಲ್ಲಿಂದ ಸೆಜರೇಯವನ್ನು ತಲುಪುವವರೆಗೆ ಎಲ್ಲಾ ಊರುಗಳಲ್ಲೂ ಶುಭಸಂದೇಶವನ್ನು ಸಾರುತ್ತಾ ಹೋದನು. |