೧ |
ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ, ಅವರನ್ನು ಸೋಲಿಸಿದನು. ಅವರ ರಾಜಧಾನಿಯನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು. |
೨ |
ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು. |
೩ |
ಬಳಿಕ ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ದಾವೀದನು ಪರಾಭವಗೊಳಿಸಿದನು. |
೪ |
ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು. |
೫ |
ದಮಸ್ಕದ ಸಿರಿಯಾದವರು ಚೋಬದ ಅರಸನಾದ ಹದದೆಜೆರನಿಗೆ ನೆರವಾಗಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸದೆಬಡಿದನು. |
೬ |
ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೆಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕಿತು. |
೭ |
ಅವನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಜೆರುಸಲೇಮಿಗೆ ಒಯ್ದನು. |
೮ |
ಇದಲ್ಲದೆ ಹದದೆಜೆರನ ಪಟ್ಟಣಗಳಿಂದ ಬೆಟಹದಿಂದಲೂ ಬೇರೋತೈಯಿಂದಲೂ ಅಪಾರ ತಾಮ್ರವನ್ನು ತೆಗೆದುಕೊಂಡು ಬಂದನು. |
೯ |
ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನ ಹಮಾತಿನ ಅರಸನಾದ ತೋವಿಗೆ ಮುಟ್ಟಿತು. |
೧೦ |
ತೋವಿಗೂ ಹದದೆಜೆರನಿಗೂ ಹಗೆತನವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದುದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು. |
೧೧ |
ಅರಸನಾದ ದಾವೀದನು ಈ ಕಾಣಿಕೆಗಳನ್ನು ಮಾತ್ರವಲ್ಲದೆ, ತನ್ನಿಂದ ಅಪಜಯಹೊಂದಿದ್ದ ಅರಾಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದಲೂ ಮತ್ತು ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ |
೧೨ |
ಪಡೆದುಕೊಂಡ ಬೆಳ್ಳಿ ಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು. |
೧೩ |
ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರಮಂದಿ ಸೈನಿಕರನ್ನು ಸೋಲಿಸಿಬಂದು ಅಂದಿನಿಂದ ಬಹಳ ಪ್ರಖ್ಯಾತಿ ಹೊಂದಿದನು. |
೧೪ |
ಎದೋಮಿನಲ್ಲೆಲ್ಲಾ ಅವನು ಕಾವಲು ದಂಡುಗಳನ್ನಿರಿಸಿದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿಹೋದರೂ ಜಯ ಉಂಟಾಯಿತು. |
೧೫ |
ದಾವೀದನು ಸಮಸ್ತ ಇಸ್ರಯೇಲಿಗೂ ಅರಸನಾಗಿ ಪ್ರಜೆಗಳೆಲ್ಲರನ್ನೂ ಧರ್ಮಾನುಸಾರ ನ್ಯಾಯಯುತವಾಗಿ ನಡೆಸುತ್ತಿದ್ದನು. |
೧೬ |
ಚೆರೂಯಳ ಮಗ ಯೋವಾಬನು ಅವನ ಸೇನಾಪತಿ ಆಗಿದ್ದನು. ಅಹೀಲೂದನ ಮಗ ಯೆಹೋಷಾಫಟನು ಅವನ ಮಂತ್ರಿ ಆಗಿದ್ದನು. |
೧೭ |
ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು. |
೧೮ |
ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.
|
Kannada Bible (KNCL) 2016 |
No Data |