೧ |
ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ದಡಕ್ಕೆ ಹೋದರು. ಅದಕ್ಕೆ ತಿಬೇರಿಯ ಸರೋವರವೆಂದು ಹೆಸರು. |
೨ |
ಜನರ ದೊಡ್ಡ ಗುಂಪೊಂದು ಅವರ ಹಿಂದೆ ಹೋಯಿತು. ಏಕೆಂದರೆ, ಯೇಸು ಸೂಚಕಕಾರ್ಯಗಳನ್ನು ಮಾಡುತ್ತಾ ರೋಗಪೀಡಿತರನ್ನು ಗುಣಪಡಿಸುತ್ತಾ ಇದ್ದುದನ್ನು ಆ ಜನರು ನೋಡಿದ್ದರು. |
೩ |
ಯೇಸು ಬೆಟ್ಟವನ್ನು ಹತ್ತಿ ತಮ್ಮ ಶಿಷ್ಯರ ಸಂಗಡ ಕುಳಿತುಕೊಂಡರು. |
೪ |
ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿತ್ತು. |
೫ |
ಯೇಸು ಕಣ್ಣು ಹಾಯಿಸಿ ನೋಡಿದಾಗ ಆ ದೊಡ್ಡ ಗುಂಪು ತಮ್ಮ ಕಡೆಗೆ ಬರುವುದನ್ನು ಕಂಡರು. “ಈ ಜನರ ಊಟಕ್ಕೆ ರೊಟ್ಟಿಯನ್ನು ನಾವು ಎಲ್ಲಿಂದ ಕೊಂಡುಕೊಳ್ಳುವುದು?” ಎಂದು ಯೇಸು ಫಿಲಿಪ್ಪನನ್ನು ಕೇಳಿದರು. |
೬ |
ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ ಅವರು ಹಾಗೆ ಹೇಳಿದರು. ಏಕೆಂದರೆ, ತಾವು ಮಾಡಲಿರುವುದು ಅವರಿಗೆ ತಿಳಿದಿತ್ತು. |
೭ |
ಅದಕ್ಕೆ ಫಿಲಿಪ್ಪನು, “ಇನ್ನೂರು ದಿನಾರಿ ನಾಣ್ಯಗಳನ್ನು ಕೊಟ್ಟು ರೊಟ್ಟಿಯನ್ನು ತಂದರೂ ಆಳಿಗೊಂದು ತುಂಡೂ ಬಾರದು,” ಎಂದನು. |
೮ |
ಆಗ ಶಿಷ್ಯರಲ್ಲಿ ಒಬ್ಬನು, ಅಂದರೆ ಸಿಮೋನ್ ಪೇತ್ರನ ಸಹೋದರನಾದ ಅಂದ್ರೆಯನು, |
೯ |
“ಇಲ್ಲಿ ಒಬ್ಬ ಹುಡುಗನ ಬಳಿ ಜವೆಗೋದಿಯ ಐದು ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಈ ಜನಸಮೂಹಕ್ಕೆ ಇವೆಲ್ಲಿ ಸಾಕಾಗುತ್ತದೆ?” ಎಂದನು. |
೧೦ |
ಯೇಸು, “ಜನರನ್ನು ಊಟಕ್ಕೆ ಕೂರಿಸಿರಿ,” ಎಂದರು. ಅಲ್ಲಿ ಹುಲುಸಾಗಿದ್ದ ಹುಲ್ಲಿನ ಮೇಲೆ ಜನರು ಕುಳಿತುಕೊಂಡರು. ಗಂಡಸರ ಸಂಖ್ಯೆಯೇ ಐದುಸಾವಿರದಷ್ಟಿತ್ತು. |
೧೧ |
ಯೇಸು, ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಕುಳಿತಿದ್ದ ಜನರಿಗೆ ಅವುಗಳನ್ನು ಹಂಚಿದರು. ಹಾಗೆಯೇ ಮೀನುಗಳನ್ನೂ ಹಂಚಿಕೊಟ್ಟರು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು. |
೧೨ |
ಅವರೆಲ್ಲರೂ ತಿಂದು ತೃಪ್ತರಾದ ಮೇಲೆ ಯೇಸು, “ತಿಂದುಳಿದ ತುಂಡುಗಳನ್ನೆಲ್ಲಾ ಒಟ್ಟುಗೂಡಿಸಿರಿ; ಒಂದು ತುಂಡೂ ಹಾಳಾಗಬಾರದು,” ಎಂದು ತಮ್ಮ ಶಿಷ್ಯರಿಗೆ ಹೇಳಿದರು. |
೧೩ |
ತಿಂದುಳಿದ ಆ ಐದು ರೊಟ್ಟಿಗಳ ತುಂಡುಗಳನ್ನು ಒಟ್ಟುಗೂಡಿಸಲು ಅವು ಹನ್ನೆರಡು ಬುಟ್ಟಿಗಳ ತುಂಬಾ ಆದವು. |
೧೪ |
ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು. |
೧೫ |
ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು. |
೧೬ |
ಸಾಯಂಕಾಲವಾದ ಮೇಲೆ ಯೇಸು ಸ್ವಾಮಿಯ ಶಿಷ್ಯರು ಸರೋವರಕ್ಕೆ ಹೋಗಿ |
೧೭ |
ದೋಣಿಯನ್ನು ಹತ್ತಿ ಕಫೆರ್ನವುಮಿನ ಕಡೆ ಸಾಗಿದರು. ಆಗಲೇ ಕತ್ತಲು ಕವಿದಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. |
೧೮ |
ಅಷ್ಟರಲ್ಲಿ ರಭಸವಾದ ಗಾಳಿ ಬೀಸತೊಡಗಿತು. ಸರೋವರವು ಅಲ್ಲೋಲಕಲ್ಲೋಲವಾಯಿತು. |
೧೯ |
ಐದು ಆರು ಕಿಲೋಮೀಟರಿನಷ್ಟು ಹುಟ್ಟು ಹಾಕಿರಬೇಕು. ಆಗ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯನ್ನು ಸಮೀಪಿಸುತ್ತಿರುವುದು ಶಿಷ್ಯರಿಗೆ ಕಾಣಿಸಿತು. ಅದನ್ನು ನೋಡಿ ಅವರು ಹೆದರಿದರು. |
೨೦ |
ಆಗ ಯೇಸು, “ನಾನೇ, ಇನ್ಯಾರೂ ಅಲ್ಲ; ಅಂಜಬೇಡಿ,” ಎಂದು ಹೇಳಿದರು. |
೨೧ |
ಶಿಷ್ಯರು ಅವರನ್ನು ದೋಣಿಯೊಳಕ್ಕೆ ಬರಮಾಡಿಕೊಳ್ಳುವುದರಲ್ಲಿದ್ದರು. ಅಷ್ಟರಲ್ಲಿ ದೋಣಿಯು ಸೇರಬೇಕಾಗಿದ್ದ ದಡವನ್ನು ತಲುಪಿತು. |
೨೨ |
ನೆರೆದಿದ್ದ ಜನರು ಮಾರನೆಯ ದಿನವೂ ಸರೋವರದ ಆಚೆಕಡೆಯೇ ಉಳಿದಿದ್ದರು. ಹಿಂದಿನ ದಿನ ಅಲ್ಲಿ ಒಂದೇ ಒಂದು ದೋಣಿ ಇದ್ದುದನ್ನು ಅವರು ನೋಡಿದ್ದರು. ಯೇಸು ಸ್ವಾಮಿ ಶಿಷ್ಯರೊಡನೆ ದೋಣಿಯನ್ನು ಹತ್ತಲಿಲ್ಲವಾದ್ದರಿಂದ ಶಿಷ್ಯರು ಮಾತ್ರ ಹೊರಟುಹೋಗಿದ್ದಾರೆಂದು ಅವರಿಗೆ ತಿಳಿದಿತ್ತು. |
೨೩ |
ತಿಬೇರಿಯದಿಂದ ಹೊರಟಿದ್ದ ದೋಣಿಗಳು ಅಷ್ಟು ಹೊತ್ತಿಗೆ ಅಲ್ಲಿಗೆ ಬಂದು ಸೇರಿದವು. ಪ್ರಭುವು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಜನರಿಗೆ ರೊಟ್ಟಿ ಬಡಿಸಿದ್ದ ಸ್ಥಳ ಅಲ್ಲೇ ಪಕ್ಕದಲ್ಲಿತ್ತು. |
೨೪ |
ಯೇಸು ಆಗಲಿ, ಅವರ ಶಿಷ್ಯರಾಗಲಿ ಇಲ್ಲದ್ದನ್ನು ನೋಡಿ ಜನರು ಆ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಫೆರ್ನವುಮಿಗೆ ಬಂದರು. |
೨೫ |
ಜನರು ಯೇಸುಸ್ವಾಮಿಯನ್ನು ಸರೋವರದ ಆಚೆದಡದಲ್ಲಿ ಕಂಡೊಡನೆ, “ಗುರುದೇವಾ, ತಾವಿಲ್ಲಿಗೆ ಬಂದುದು ಯಾವಾಗ?” ಎಂದು ಕೇಳಿದರು. |
೨೬ |
ಯೇಸು ಅವರಿಗೆ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನನ್ನನ್ನು ಹುಡುಕಿಕೊಂಡು ಬಂದದ್ದು ಸೂಚಕಕಾರ್ಯಗಳನ್ನು ನೋಡಿ ಗ್ರಹಿಸಿಕೊಂಡಿದ್ದರಿಂದ ಅಲ್ಲ, ಹೊಟ್ಟೆತುಂಬುವಷ್ಟು ರೊಟ್ಟಿ ಸಿಕ್ಕಿದ್ದರಿಂದ. |
೨೭ |
ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು. |
೨೮ |
ಆಗ ಆ ಜನರು, “ದೇವರು ಮೆಚ್ಚುವ ಕಾರ್ಯಗಳನ್ನು ನಾವು ಮಾಡಬೇಕಾದರೆ, ಏನುಮಾಡಬೇಕು?” ಎಂದು ಕೇಳಿದರು. |
೨೯ |
ಅದಕ್ಕೆ ಯೇಸು, “ದೇವರು ಕಳುಹಿಸಿದಾತನನ್ನು ನೀವು ವಿಶ್ವಾಸಿಸಬೇಕು. ಇದೇ ಅವರು ಮೆಚ್ಚುವ ಕಾರ್ಯ,” ಎಂದರು. |
೩೦ |
ಅದಕ್ಕೆ ಆ ಜನರು, “ನಾವು ನೋಡಿ ನಿಮ್ಮಲ್ಲಿ ವಿಶ್ವಾಸ ಇಡುವಂತೆ ನೀವು ಏನು ಮಾಡುವಿರಿ? ಯಾವ ಸೂಚಕಕಾರ್ಯವನ್ನು ತೋರಿಸುವಿರಿ? |
೩೧ |
ನಮ್ಮ ಪೂರ್ವಜರಿಗೆ ಮರುಭೂಮಿಯಲ್ಲಿ ತಿನ್ನಲು ‘ಮನ್ನಾ’ ಸಿಕ್ಕಿತು. ತಿನ್ನಲು ಅವರಿಗೆ ಸ್ವರ್ಗದಿಂದ ರೊಟ್ಟಿ ದೊರಕಿತು, ಎಂದು ಪವಿತ್ರಗ್ರಂಥವೇ ಹೇಳುತ್ತದೆಯಲ್ಲವೇ?’ ಎಂದರು. |
೩೨ |
ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ; ಸ್ವರ್ಗದಿಂದ ನಿಮಗೆ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ; ನಿಮಗೆ ಸ್ವರ್ಗದಿಂದ ನಿಜವಾದ ರೊಟ್ಟಿಯನ್ನು ಕೊಡುವವರು ನನ್ನ ಪಿತನೇ. |
೩೩ |
ಏಕೆಂದರೆ, ಸ್ವರ್ಗದಿಂದ ಇಳಿದುಬಂದು ಲೋಕಕ್ಕೆ ಸಜ್ಜೀವವನ್ನೀಯುವಾತನೇ ದೇವರು ಕೊಡುವ ರೊಟ್ಟಿ,” ಎಂದು ಹೇಳಿದರು. |
೩೪ |
ಅದಕ್ಕೆ ಆ ಜನರು, “ಅಂಥಾ ರೊಟ್ಟಿಯನ್ನೇ ನಮಗೆ ಯಾವಾಗಲೂ ಕೊಡಿ,” ಎಂದು ಕೇಳಿದರು. |
೩೫ |
ಆಗ ಯೇಸು, “ನಾನೇ ಜೀವದಾಯಕ ರೊಟ್ಟಿ, ನನ್ನ ಬಳಿ ಬರುವವನಿಗೆ ಹಸಿವೇ ಇರದು; ನನ್ನಲ್ಲಿ ವಿಶ್ವಾಸವಿಡುವವನಿಗೆ ಎಂದಿಗೂ ದಾಹವಾಗದು. |
೩೬ |
ಆದರೆ, ನಾನು ನಿಮಗೆ ಹೇಳಿದಂತೆ, ನೀವು ನನ್ನನ್ನು ನೋಡಿಯೂ ವಿಶ್ವಾಸಿಸದೆ ಇದ್ದೀರಿ. |
೩೭ |
ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ. |
೩೮ |
ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ. |
೩೯ |
ಅವರ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು. |
೪೦ |
ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು. |
೪೧ |
“ಸ್ವರ್ಗದಿಂದ ಇಳಿದುಬಂದ ರೊಟ್ಟಿ ನಾನೇ” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಗೊಣಗತೊಡಗಿದರು. |
೪೨ |
ಅವರು, “ಈತನು ಜೋಸೆಫನ ಮಗನಾದ ಯೇಸು ಅಲ್ಲವೆ? ಈತನ ತಂದೆ ತಾಯಿ ನಮಗೆ ಗೊತ್ತಿಲ್ಲವೆ? ಅಂದಮೇಲೆ, ‘ನಾನು ಸ್ವರ್ಗದಿಂದ ಬಂದಿದ್ದೇನೆ,’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು. |
೪೩ |
ಅದಕ್ಕೆ ಯೇಸು, “ನಿಮ್ಮನಿಮ್ಮೊಳಗೆ ಗೊಣಗುಟ್ಟದಿರಿ. |
೪೪ |
ನನ್ನನ್ನು ಕಳುಹಿಸಿಕೊಟ್ಟ ಪಿತನು, ನನ್ನತ್ತ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬಾರರು. ಬಂದವರನ್ನು ನಾನು ಅಂತಿಮ ದಿನದಂದು ಜೀವಕ್ಕೆ ಎಬ್ಬಿಸುತ್ತೇನೆ. |
೪೫ |
‘ದೇವರಿಂದಲೇ ಅವರೆಲ್ಲರೂ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ಪಿತನಿಗೆ ಕಿವಿಕೊಟ್ಟು ಅವರಿಂದಲೇ ಕಲಿತುಕೊಂಡ ಪ್ರತಿ ಒಬ್ಬನೂ ನನ್ನ ಬಳಿಗೆ ಬರುತ್ತಾನೆ. |
೪೬ |
ಹಾಗೆಂದ ಮಾತ್ರಕ್ಕೆ ಪಿತನನ್ನು ಯಾರಾದರೂ ಕಣ್ಣಾರೆ ಕಂಡಿದ್ದಾರೆ ಎಂದಲ್ಲ, ದೇವರಿಂದ ಬಂದಿರುವ ಒಬ್ಬನು ಮಾತ್ರ ಪಿತನನ್ನು ಕಂಡಿದ್ದಾನೆ. |
೪೭ |
ವಿಶ್ವಾಸವುಳ್ಳವನಲ್ಲಿ ನಿತ್ಯಜೀವ ಇದೆಯೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. |
೪೮ |
ಜೀವದಾಯಕ ರೊಟ್ಟಿ ನಾನೇ. |
೪೯ |
ನಿಮ್ಮ ಪೂರ್ವಜರು ಮರಳುಗಾಡಿನಲ್ಲಿ, ‘ಮನ್ನಾ’ವನ್ನು ತಿಂದರು; ಆದರೂ ಸಾವಿಗೆ ತುತ್ತಾದರು. |
೫೦ |
ಸ್ವರ್ಗದಿಂದ ಇಳಿದುಬಂದ ರೊಟ್ಟಿಯಾದರೋ ಹಾಗಲ್ಲ, ಇದನ್ನು ತಿನ್ನುವ ಯಾರಿಗೂ ಸಾವೆಂಬುದು ಇಲ್ಲ. |
೫೧ |
ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು. |
೫೨ |
ಅಷ್ಟಕ್ಕೆ ಆ ಯೆಹೂದ್ಯರಲ್ಲಿ ತೀವ್ರ ವಾಗ್ವಾದ ಉಂಟಾಯಿತು. “ಈತನು ತನ್ನ ಮಾಂಸವನ್ನು ತಿನ್ನಲು ಹೇಗೆ ಕೊಟ್ಟಾನು?” ಎಂದು ಕೇಳತೊಡಗಿದರು. |
೫೩ |
ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನರಪುತ್ರನ ಮಾಂಸವನ್ನು ತಿನ್ನದೆ, ಆತನ ರಕ್ತವನ್ನು ಕುಡಿಯದೆಹೋದರೆ ನಿಮ್ಮಲ್ಲಿ ಜೀವ ಇರುವುದಿಲ್ಲ. |
೫೪ |
ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನಲ್ಲಿ ನಿತ್ಯಜೀವ ಇರುತ್ತದೆ. ಅಲ್ಲದೆ ಅಂತಿಮ ದಿನದಂದು ನಾನು ಅವನನ್ನು ಜೀವಕ್ಕೆ ಎಬ್ಬಿಸುತ್ತೇನೆ. |
೫೫ |
ನನ್ನ ಮಾಂಸವೇ ನಿಜವಾದ ಆಹಾರ; ನನ್ನ ರಕ್ತವೇ ನಿಜವಾದ ಪಾನ. |
೫೬ |
ನನ್ನ ಮಾಂಸವನ್ನು ತಿಂದು, ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ನೆಲೆಸಿರುತ್ತಾನೆ. ನಾನು ಅವನಲ್ಲಿ ನೆಲೆಸಿರುತ್ತೇನೆ. |
೫೭ |
ಜೀವಸ್ವರೂಪಿ ಆದ ಪಿತನು ನನ್ನನ್ನು ಕಳುಹಿಸಿಕೊಟ್ಟಿರುವರು. ನಾನು ಅವರಿಂದಲೇ ಜೀವಿಸುತ್ತೇನೆ. ಅಂತೆಯೇ ನನ್ನನ್ನು ಭುಜಿಸುವವನು ನನ್ನಿಂದಲೇ ಜೀವಿಸುತ್ತಾನೆ. |
೫೮ |
ಸ್ವರ್ಗದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಪೂರ್ವಜರು ‘ಮನ್ನಾ’ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ. ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು,” ಎಂದು ಹೇಳಿದರು. |
೫೯ |
ಕಫೆರ್ನವುಮಿನ ಪ್ರಾರ್ಥನಾಮಂದಿರದಲ್ಲಿ ಯೇಸು ಬೋಧನೆಮಾಡುತ್ತಿದ್ದಾಗ ಆಡಿದ ಮಾತುಗಳಿವು. |
೬೦ |
ಯೇಸುಸ್ವಾಮಿಯ ಶಿಷ್ಯರಲ್ಲಿ ಹಲವರು, “ಇವು ಕಟುವಾದ ಮಾತುಗಳು, ಇವನ್ನು ಯಾರುತಾನೆ ಕೇಳಿಯಾರು?” ಎಂದು ಮಾತನಾಡಿಕೊಂಡರು. |
೬೧ |
ಈ ವಿಷಯವಾಗಿ ತಮ್ಮ ಶಿಷ್ಯರು ಗೊಣಗುಟ್ಟುತ್ತಿರುವುದನ್ನು ಯೇಸು ತಾವಾಗಿಯೇ ಅರಿತು, “ಇಷ್ಟುಮಾತ್ರಕ್ಕೆ ನೀವು ಕಂಗೆಡಬೇಕೆ? |
೬೨ |
ಹಾಗಾದರೆ ನರಪುತ್ರನು ತಾನು ಮೊದಲಿದ್ದ ಸ್ಥಳಕ್ಕೆ ಮರಳಿ ಏರುವುದನ್ನು ನೀವು ಕಂಡಾಗ ಏನನ್ನುವಿರಿ? |
೬೩ |
ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ. |
೬೪ |
ಆದರೂ ನಿಮ್ಮಲ್ಲಿ ಕೆಲವರಿಗೆ ವಿಶ್ವಾಸವಿಲ್ಲ,” ಎಂದು ಹೇಳಿದರು. (ವಿಶ್ವಾಸವಿಲ್ಲದವರು ಯಾರು, ತಮ್ಮನ್ನು ಹಿಡಿದುಕೊಡುವ ಗುರುದ್ರೋಹಿ ಯಾರು, ಎಂದು ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.) |
೬೫ |
“ ‘ಪಿತನು ಅನುಗ್ರಹಿಸಿದ ಹೊರತು ಯಾರೂ ನನ್ನ ಬಳಿಗೆ ಬರಲಾರರು,’ ಎಂದು ನಾನು ಹೇಳಿದುದು ಇದಕ್ಕಾಗಿಯೇ,” ಎಂದು ಯೇಸು ಮತ್ತೆ ನುಡಿದರು. |
೬೬ |
ಅಂದಿನಿಂದ ಯೇಸುಸ್ವಾಮಿಯ ಹಿಂಬಾಲಕರಲ್ಲಿ ಹಲವರು ಅವರ ಸಹವಾಸವನ್ನು ಬಿಟ್ಟುಬಿಟ್ಟರು. ಹೋದವರು ಹಿಂದಿರುಗಿ ಬರಲಿಲ್ಲ. |
೬೭ |
ಆಗ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಕೂಡ ಹೋಗಬೇಕೆಂದು ಇದ್ದೀರಾ?’ ಎಂದು ಕೇಳಿದರು. |
೬೮ |
ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ. |
೬೯ |
ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು. |
೭೦ |
ಆಗ ಯೇಸು, “ನಿಮ್ಮಲ್ಲಿ ಹನ್ನೆರಡುಮಂದಿಯನ್ನು ನಾನು ಆಯ್ದುಕೊಂಡೆನಲ್ಲವೆ? ಆದರೂ ನಿಮ್ಮಲ್ಲಿ ಒಬ್ಬನು ಪಿಶಾಚಿಯಾಗಿ ಇದ್ದಾನೆ,” ಎಂದರು. |
೭೧ |
ಅವರು ಹೀಗೆ ಹೇಳಿದ್ದು ಸಿಮೋನನ ಮಗ ಇಸ್ಕರಿಯೋತಿನ ಯೂದನನ್ನು ಕುರಿತು. ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದುಕೊಡಲಿದ್ದ ಗುರುದ್ರೋಹಿ.
|
Kannada Bible (KNCL) 2016 |
No Data |
|
|
|
|
|
|
|
|
|
|
ಯೊವಾನ್ನನು ೬:1 |
ಯೊವಾನ್ನನು ೬:2 |
ಯೊವಾನ್ನನು ೬:3 |
ಯೊವಾನ್ನನು ೬:4 |
ಯೊವಾನ್ನನು ೬:5 |
ಯೊವಾನ್ನನು ೬:6 |
ಯೊವಾನ್ನನು ೬:7 |
ಯೊವಾನ್ನನು ೬:8 |
ಯೊವಾನ್ನನು ೬:9 |
ಯೊವಾನ್ನನು ೬:10 |
ಯೊವಾನ್ನನು ೬:11 |
ಯೊವಾನ್ನನು ೬:12 |
ಯೊವಾನ್ನನು ೬:13 |
ಯೊವಾನ್ನನು ೬:14 |
ಯೊವಾನ್ನನು ೬:15 |
ಯೊವಾನ್ನನು ೬:16 |
ಯೊವಾನ್ನನು ೬:17 |
ಯೊವಾನ್ನನು ೬:18 |
ಯೊವಾನ್ನನು ೬:19 |
ಯೊವಾನ್ನನು ೬:20 |
ಯೊವಾನ್ನನು ೬:21 |
ಯೊವಾನ್ನನು ೬:22 |
ಯೊವಾನ್ನನು ೬:23 |
ಯೊವಾನ್ನನು ೬:24 |
ಯೊವಾನ್ನನು ೬:25 |
ಯೊವಾನ್ನನು ೬:26 |
ಯೊವಾನ್ನನು ೬:27 |
ಯೊವಾನ್ನನು ೬:28 |
ಯೊವಾನ್ನನು ೬:29 |
ಯೊವಾನ್ನನು ೬:30 |
ಯೊವಾನ್ನನು ೬:31 |
ಯೊವಾನ್ನನು ೬:32 |
ಯೊವಾನ್ನನು ೬:33 |
ಯೊವಾನ್ನನು ೬:34 |
ಯೊವಾನ್ನನು ೬:35 |
ಯೊವಾನ್ನನು ೬:36 |
ಯೊವಾನ್ನನು ೬:37 |
ಯೊವಾನ್ನನು ೬:38 |
ಯೊವಾನ್ನನು ೬:39 |
ಯೊವಾನ್ನನು ೬:40 |
ಯೊವಾನ್ನನು ೬:41 |
ಯೊವಾನ್ನನು ೬:42 |
ಯೊವಾನ್ನನು ೬:43 |
ಯೊವಾನ್ನನು ೬:44 |
ಯೊವಾನ್ನನು ೬:45 |
ಯೊವಾನ್ನನು ೬:46 |
ಯೊವಾನ್ನನು ೬:47 |
ಯೊವಾನ್ನನು ೬:48 |
ಯೊವಾನ್ನನು ೬:49 |
ಯೊವಾನ್ನನು ೬:50 |
ಯೊವಾನ್ನನು ೬:51 |
ಯೊವಾನ್ನನು ೬:52 |
ಯೊವಾನ್ನನು ೬:53 |
ಯೊವಾನ್ನನು ೬:54 |
ಯೊವಾನ್ನನು ೬:55 |
ಯೊವಾನ್ನನು ೬:56 |
ಯೊವಾನ್ನನು ೬:57 |
ಯೊವಾನ್ನನು ೬:58 |
ಯೊವಾನ್ನನು ೬:59 |
ಯೊವಾನ್ನನು ೬:60 |
ಯೊವಾನ್ನನು ೬:61 |
ಯೊವಾನ್ನನು ೬:62 |
ಯೊವಾನ್ನನು ೬:63 |
ಯೊವಾನ್ನನು ೬:64 |
ಯೊವಾನ್ನನು ೬:65 |
ಯೊವಾನ್ನನು ೬:66 |
ಯೊವಾನ್ನನು ೬:67 |
ಯೊವಾನ್ನನು ೬:68 |
ಯೊವಾನ್ನನು ೬:69 |
ಯೊವಾನ್ನನು ೬:70 |
ಯೊವಾನ್ನನು ೬:71 |
|
|
|
|
|
|
ಯೊವಾನ್ನನು 1 / ಯೊ 1 |
ಯೊವಾನ್ನನು 2 / ಯೊ 2 |
ಯೊವಾನ್ನನು 3 / ಯೊ 3 |
ಯೊವಾನ್ನನು 4 / ಯೊ 4 |
ಯೊವಾನ್ನನು 5 / ಯೊ 5 |
ಯೊವಾನ್ನನು 6 / ಯೊ 6 |
ಯೊವಾನ್ನನು 7 / ಯೊ 7 |
ಯೊವಾನ್ನನು 8 / ಯೊ 8 |
ಯೊವಾನ್ನನು 9 / ಯೊ 9 |
ಯೊವಾನ್ನನು 10 / ಯೊ 10 |
ಯೊವಾನ್ನನು 11 / ಯೊ 11 |
ಯೊವಾನ್ನನು 12 / ಯೊ 12 |
ಯೊವಾನ್ನನು 13 / ಯೊ 13 |
ಯೊವಾನ್ನನು 14 / ಯೊ 14 |
ಯೊವಾನ್ನನು 15 / ಯೊ 15 |
ಯೊವಾನ್ನನು 16 / ಯೊ 16 |
ಯೊವಾನ್ನನು 17 / ಯೊ 17 |
ಯೊವಾನ್ನನು 18 / ಯೊ 18 |
ಯೊವಾನ್ನನು 19 / ಯೊ 19 |
ಯೊವಾನ್ನನು 20 / ಯೊ 20 |
ಯೊವಾನ್ನನು 21 / ಯೊ 21 |